ಉಡುಪಿ (ಜೂ.24): ಕರ್ನಾಟಕದ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ದೇಶದ ವಿವಿಧ ಕಡೆಗಳಲ್ಲಿ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಕಳುಹಿಸುತ್ತಿದ್ದ ಯುವತಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಚೆನ್ನೈ ಮೂಲದ ರೀನಾ ಜೊಶಿಲ್ಡ ಆಗಿದ್ದು, ಈಕೆಯನ್ನು ಗುಜರಾತ್ನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇಂಜಿನಿಯರಿಂಗ್ ಅಧ್ಯಯನ ಮಾಡಿ ಚೆನ್ನೈಯಲ್ಲಿ ಎಂಜಿನಿಯರ್ ಆಗಿದ್ದ ರೀನಾ ಜೊಶಿಲ್ಡ, ಹುಸಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಳು.

ಇದನ್ನೂ ಓದಿ: 🛑ಇಂದಬೆಟ್ಟು: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ
ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ಡಿದ್ದಳು. ಹೀಗಾಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ಗೆ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
ಬಾಂಬ್ ಬೆದರಿಕೆ ಇ-ಮೇಲ್ ಸಂದೇಶದಲ್ಲೇನಿತ್ತು?
‘ನಿಮ್ಮ ಶಾಲೆಯಲ್ಲಿ ಬಾಂಬ್ ಸ್ಫೋಟಿಸಿದರೆ ಮಕ್ಕಳು ಸಾಯುತ್ತಾರೆ. ಮಕ್ಕಳು ಸತ್ತರೆ ಮಾತ್ರ ಪೋಷಕರು ಪ್ರತಿಭಟನೆ ಮಾಡುತ್ತಾರೆ. ಪೊಲೀಸರು ಸರಿಯಾದ ತನಿಖೆ ನಡೆಸಿ ಹೈದರಾಬಾದಿನ ಅತ್ಯಾಚಾರ ಸಂತ್ರಸ್ತೆಗೆ ನ್ಯಾಯ ಒದಗಿಸುತ್ತಾರೆ’ ಎಂದು ಇ-ಮೇಲ್ ಸಂದೇಶದಲ್ಲಿ ಉಲ್ಲೇಖಿಸಲಾಗಿತ್ತು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಆರೋಪಿ ಇದೇ ರೀತಿಯ ಇ-ಮೇಲ್ ಸಂದೇಶ ಕಳುಹಿಸಿದ್ದಳು. ಶಾಲೆಗಳು, ಆಸ್ಪತ್ರೆಗಳು ಮತ್ತು ಕ್ರೀಡಾಂಗಣಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಳು.



ಸದ್ಯ, ಗುಜರಾತಿನ ಅಹಮದಾಬಾದ್ ಪೊಲೀಸರಿಂದ ಆರೋಪಿ ರೀನಾ ಜೋಶಿಲ್ಡ ವಿಚಾರಣೆ ನಡೆಯುತ್ತಿದೆ. ಆಕೆಯನ್ನು ಉಡುಪಿಯ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿ ಕಸ್ಟಡಿ ನೀಡಲು ಉಡುಪಿ ಪೊಲೀಸರು ಮನವಿ ಮಾಡಿದ್ದಾರೆ. ಅಹಮದಾಬಾದ್ ಪೊಲೀಸರಿಗೆ ಪತ್ರ ಬರೆದಿದ್ದಾರೆ.
ಅಹಮದಾಬಾದ್ ಪೊಲೀಸರ ತನಿಖೆ ಮುಗಿದ ನಂತರ ಆರೋಪಿಯನ್ನು ನಮ್ಮ ವಶಕ್ಕೆ ನೀಡುವ ಸಾಧ್ಯತೆ ಇದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದಾರೆ.
