ಉಜಿರೆ:(ಜು.9) ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸ್ಥಾಪನ ದಿನಾಚರಣೆ ಹಾಗೂ ನೂತನ ಚಿಣ್ಣರ ಆಟದ ಮನೆ ಉದ್ಘಾಟನೆ ಜು.8 ರಂದು ನಡೆಯಿತು.

ಇದನ್ನೂ ಓದಿ: ⭕ಬೆಳ್ತಂಗಡಿ: ವಿಷ ಸೇವಿಸಿ ಯುವಕ ಆತ್ಮಹತ್ಯೆ
ಶಾಲಾ ಶತಮಾನೋತ್ಸವ ಸಮಿತಿ ಮತ್ತು ಶಿಕ್ಷಕ ರಕ್ಷಕ ಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಧರ್ಮಸ್ಥಳದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಆಟದ ಮನೆಯನ್ನೂ ಉದ್ಘಾಟಿಸಿದ ಅವರು ಮಾತನಾಡುತ್ತಾ, ಹಿಂದೆ ಅವಿಭಕ್ತ ಕುಟುಂಬ ವ್ಯವಸ್ಥೆಯಿಂದಾಗಿ ಮಕ್ಕಳಲ್ಲಿ ಒಂಟಿತನ ಕಾಡುತ್ತಿರಲಿಲ್ಲ. ಇಂದು ಮೈಕ್ರೋ ಫ್ಯಾಮಿಲಿ ಪರಿಕಲ್ಪನೆಯಿಂದಾಗಿ ಕಿಂಡರ್ ಗಾರ್ಟನ್ ನಂತಹ ಸಂಸ್ಕೃತಿ ಬೆಳೆದುಕೊಂಡಿದೆ. ಈ ನಿಟ್ಟಿನಲ್ಲಿ ಆಟದ ಮನೆ ವ್ಯವಸ್ಥೆಯು ಮಕ್ಕಳಿಗೆ ಪ್ರಯೋಜನಕಾರಿ ಎಂದರು.


ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅವರು ಮಾತನಾಡಿ, ಮಕ್ಕಳ ವಿದ್ಯಾರ್ಜನೆಗೆ ಬೇಕಾಗಿರುವ ಮೂಲ ಸೌಕರ್ಯಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳವು ಒದಗಿಸಿಕೊಡುತ್ತಿದೆ. ಶತಮಾನೋತ್ಸವ ಸಮಿತಿ ವತಿಯಿಂದ ತಿಂಗಳಿಗೆ ಒಂದು ಕಾರ್ಯಕ್ರಮ ಆಯೋಜಿಸುತ್ತಿರುವುದು ಪ್ರಶಂಸನೀಯ. ಆಂಗ್ಲ ಮಾಧ್ಯಮ ಶಾಲೆಗಳ ನಡುವೆ ಶತಮಾನೋತ್ಸವ ಆಚರಿಸುತ್ತಿರುವ ಈ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಶಾಂತಾ ಮತ್ತು ಈಶ್ವರ ದೇವಾಡಿಗ (ಅವರ ನಿವಾಸದಲ್ಲಿ) ಅವರನ್ನು ಶಾಲಾ ಶತಮಾನೋತ್ಸವ ಸಮಿತಿ ಪರವಾಗಿ ಸನ್ಮಾನಿಸಲಾಯಿತು.

ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶರತ್ ಕೃಷ್ಣ ಪಡ್ವೆಟ್ನಾಯ ಸ್ವಾಗತಿಸಿ ಪ್ರಸ್ತಾವನೆಗೈದರು.
ಶತಮಾನೋತ್ಸವ ಸಮಿತಿ ಪದಾಧಿಕಾರಿಗಳು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಸೋಮಶೇಖರ ಶೆಟ್ಟಿ ಧನ್ಯವಾದ ಗೈದರು.
