ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ವತಿಯಿಂದ ಕಾಲೇಜಿನ ಆವರಣದಲ್ಲಿ ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026 ಅಭೂತಪೂರ್ವವಾಗಿ ನಡೆಯಿತು.
ಬೃಹತ್ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಉಜಿರೆಯ RUDSET ನಿರ್ದೇಶಕರಾದ ಅಜೇಯ ಚಾಲನೆ ನೀಡಿದರು. ಬಳಿಕ ಮಾತನಾಡಿದ ಇವರು, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಉತ್ಸವಗಳು ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮೊಳಗಿನ ಪ್ರತಿಭೆಗಳನ್ನು ಮುಕ್ತವಾಗಿ ಪ್ರದರ್ಶಿಸುವುದರ ಜೊತೆಗೆ ಸ್ಪರ್ಧೆಗಳ ವೇದಿಕೆಯಲ್ಲಿ ತೆರೆದುಕೊಂಡಾಗ ಮಾತ್ರ ಮತ್ತಷ್ಟು ಎತ್ತರಕ್ಕೆ ಬೆಳೆಯಲು ಸಾಧ್ಯವಾಗುತ್ತದೆ. ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ನಿರಂತರವಾಗಿ ಇಂತಹ ಕಾರ್ಯಕ್ರಮಗಳಿಗೆ ವೇದಿಕೆನ್ನು ಕಲ್ಪಿಸಿಕೊಡುತ್ತಾ ಬಂದಿದೆ. ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳುವುದರ ಜೊತೆಗೆ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಮಾತನಾಡಿ, ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಹಿಸುವ ಸಲುವಾಗಿ ಇಂತಹ ಕಾರ್ಯಕ್ರಮಗಳನ್ನು ಕಾಲೇಜು ಪ್ರತಿವರ್ಷ ನಡೆಸಿಕೊಂಡು ಬಂದಿದೆ. ಇದು ವಿದ್ಯಾರ್ಥಿಗಳಿಗೆ ನಾನ ಅವಕಾಶ ಮತ್ತು ಹೊಸ ಅನುಭವವನ್ನು ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮಾಭಿವೃದ್ಧಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ ಪಾಲ್ಗೊಂಡು, ಸಾಂಸ್ಕೃತಿಕ ಉತ್ಸವದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿಜೇತರಿಗೆ ಪ್ರಶಸ್ತಿ ನೀಡಿ ಅಭಿನಂದಿಸಿದರು. ಬಳಿಕ ಕಾರ್ಯಕ್ರಮದ ಆಯೋಜಕರಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಈ ವೇಳೆ ಕಾಲೇಜಿನ ಪ್ರಾಚಾರ್ಯರು ಸೇರಿದಂತೆ ಕಾರ್ಯಕ್ರಮ ಸಂಯೋಜಕರಾದ ಡಾ. ಶೋಭಾ ಜೀವಂಧರ್, ಡಾ. ಬಸವ ಮತ್ತು ಡಾ. ಕೃಷ್ಣ ಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಉತ್ಸವದಲ್ಲಿ 12 ವಿವಿಧ ರೀತಿಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸುಮಾರು 600 ಅಧಿಕ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಛಾಯಾಚಿತ್ರಗಳ ಪ್ರದರ್ಶನದ ಜೊತೆಗೆ, ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಅಂಚೆ ಚೀಟಿಗಳು , ನಾಣ್ಯಗಳು, ಕೈಗಾರಿಕಾ ವಸ್ತುಗಳು ಮತ್ತು ಪುರಾತನ ಸಂಗ್ರಹಗಳು ಎಲ್ಲರ ಗಮನ ಸೆಳೆದವು.
ಸಂಜೆಯ ವೇಳೆ “Wakeup the Band” ತಂಡದಿಂದ ಎಸ್.ಡಿ.ಎಂ ಐಟಿ ವಸತಿ ನಿಲಯದ ಆವರಣದಲ್ಲಿ ಸಂಗೀತ ಸಂಜೆ ಮತ್ತು ಮನೋರಂಜನೀಯ ಕಾರ್ಯಕ್ರಮ ಭರ್ಜರಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳು ಸೇರಿದಂತೆ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿವರ್ಗದವರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಕುಮಾರಿ ಘಾನವಿ ನಿರೂಪಿಸಿ, ಕುಮಾರಿ ಪಂಚಮಿ ಸ್ವಾಗತಿಸಿದರು. ಕುಮಾರಿ ವೈಷ್ಣವಿ ವಂದನಾರ್ಪಣೆಯನ್ನು ಅವರು ಸಲ್ಲಿಸಿದರು.







