ಬೆಂಗಳೂರು: ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್ಆರ್ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದಾಗಿ ಬಸ್ನಲ್ಲಿದ್ದ ಎಲ್ಲಾ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಬಳಿ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬಸ್ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಪಕ್ಕೀರಪ್ಪ ಎಲ್ಲಾ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ.
ಆರಂಭದಲ್ಲಿ ಬಸ್ ಚಾಲಕ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಕೆಲವೇ ಕ್ಷಣಗಳಲ್ಲಿ ಬೆಂಕಿ ತೀವ್ರತೆ ಹೆಚ್ಚಾಗಿ ಇಡೀ ಬಸ್ನ್ನು ಆವರಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಪಲ್ಲಕ್ಕಿ ಬಸ್ ಬೆಂಕಿಗಾಹುತಿಯಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೆಯೇ ಹೆದ್ದಾರಿಯಲ್ಲಿ ಉಂಟಾಗಿದ್ದ ಟ್ರಾಫಿಕ್ ಕ್ಲಿಯರ್ ಮಾಡುತ್ತಿದ್ದಾರೆ. ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ಯಾಕೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.







