ಬೆಳ್ತಂಗಡಿ: ಮೊಬೈಲ್ ಸಂಭಾಷಣೆಯನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣ ಹಾಗೂ ಟಿವಿ ಚಾನೆಲ್ನಲ್ಲಿ ಪ್ರಸಾರ ಮಾಡಿದ ಬಗ್ಗೆ ಪ್ರಜ್ವಲ್ ಕುಮಾರ್ ಗುರುವಾಯನಕರೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಉಜಿರೆಯ ಅಂತರ ಮನೆ ಅನಿಲ್ ಕುಮಾರ್ ಅವರು ದೂರು ನೀಡಿದವರು. ನಾನು ಫೇಸ್ಬುಕ್ನಲ್ಲಿ ವಿಡಿಯೋಗಳನ್ನು ವೀಕ್ಷಿಸುತ್ತಿರುವಾಗ, ಉಜಿರೆ ನಿವಾಸಿಯಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಪ್ರಜ್ವಲ್ ಕುಮಾರ್ ಗುರುವಾಯನಕೆರೆ ಎಂಬುವರ ನಡುವೆ ನಡೆದ ಫೋನ್ ಸಂಭಾಷಣೆಯ ಕಾಲ್ ರೆಕಾರ್ಡ್ ಅಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಂಚಲಾಗಿರುವುದು ಗಮನಕ್ಕೆ ಬಂದಿದೆ. ಈ ಸಂಭಾಷಣೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯವರು ಯಕ್ಷಗಾನ ಪ್ರಸಂಗಗಳ ಪಾವಿತ್ರತೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಆ ಮಾತುಗಳನ್ನು ಪ್ರಜ್ವಲ್ ಅವರು ಅವರ ಅನುಮತಿ ಇಲ್ಲದೆ ರೆಕಾರ್ಡ್ ಮಾಡಿಕೊಂಡು, ಯೂಟ್ಯೂಬ್, ಫೇಸ್ಬುಕ್ ಮತ್ತು ವಾಟ್ಸಪ್ ಗುಂಪುಗಳಲ್ಲಿ ಶೇರ್ ಮಾಡಿದ್ದಾರೆ. ಇದಲ್ಲದೆ, ಈ ಆಡಿಯೋವನ್ನು ಟಿವಿ ವಾಹಿನಿಯೊಂದರಲ್ಲಿ ಪ್ರಸಾರ ಮಾಡಲಾಗಿದೆ. ಈ ಕೃತ್ಯದಿಂದ ವ್ಯಕ್ತಿಯ ಗೌಪ್ಯತೆ
ಹಕ್ಕು ಉಲ್ಲಂಘನೆಯಾಗಿದೆ. ಅನುಮತಿ ಇಲ್ಲದೆ ಖಾಸಗಿ ಸಂಭಾಷಣೆ ಸಾರ್ವಜನಿಕವಾಗಿ ಪ್ರಸಾರವಾಗಿದೆ ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ, ಪ್ರಜ್ವಲ್ ಕುಮಾರ್ ಗುರುವಾಯನಕೆರೆ ಎಂಬ ವ್ಯಕ್ತಿಯ ವಿರುದ್ಧ ತಕ್ಷಣವೇ ಎಫ್ ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಂಡು ಹಾಗೂ ಈ ಆಡಿಯೋವನ್ನು ಎಲ್ಲಾ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಿಂದ ತೆಗೆದುಹಾಕುವ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆ.







