ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಶಾಲೆಯ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ಅವರ ಅಧ್ಯಕ್ಷತೆಯಲ್ಲಿ ನೆರವೇರಿತು.





ಕಾರ್ಯಕ್ರಮವು ಶಾಲಾ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಬಳಿಕ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ಪರಿಸರ ಗೀತೆಗಳನ್ನು ಹಾಡುವ ಮೂಲಕ ಎಲ್ಲರಲ್ಲೂ ಪರಿಸರ ಜಾಗೃತಿಯನ್ನು ಮೂಡಿಸಿದರು. ತದನಂತರ ವಿದ್ಯಾರ್ಥಿ ಪಂಚಮ್ ಅವರು ವಿಶ್ವ ಪರಿಸರ ದಿನಾಚರಣೆಯ ಉದ್ದೇಶ ಹಾಗೂ ಅದರ ಮಹತ್ವದ ಕುರಿತು ಮಾಹಿತಿ ನೀಡಿ, ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ ಎಂಬ ಸಂದೇಶವನ್ನು ತಿಳಿಸಿದರು.
ಬಳಿಕ ಪ್ರಾಂಶುಪಾಲರಾದ ವಂ. ಫಾ. ವಿಜಯ್ ಲೋಬೋ ಅವರು ಶಾಲಾ ಆವರಣದಲ್ಲಿ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಅವರು ಪರಿಸರವನ್ನು ಸಂರಕ್ಷಿಸುವುದು ಇಂದಿನ ಅಗತ್ಯವಾಗಿದ್ದು, ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದನ್ನು ಪೋಷಿಸುವ ಮೂಲಕ ಪ್ರಕೃತಿಯ ರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಪರಿಸರ ಉಳಿಸಿ, ಬೆಳೆಸಿ ಹಾಗೂ ರಕ್ಷಿಸುವ ಮೂಲಕ ಮುಂದಿನ ಪೀಳಿಗೆಗೆ ಆರೋಗ್ಯಕರ ಮತ್ತು ಸುಂದರವಾದ ಭೂಮಿಯನ್ನು ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಹೇಳಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ರಿಶಲ್ ಫೆರ್ನಾಂಡಿಸ್ ಅವರು ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.







