ಕೊಕ್ಕಡ, ಜೂ.16: ಎಂದಿನಂತೆ ಕಾಲೇಜಿಗೆ ಹೋಗಲು ಸಿದ್ಧತೆ ನಡೆಸುತ್ತಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು 18 ವರ್ಷದ ಶ್ವೇತಾ ಎಂದು ಗುರುತಿಸಲಾಗಿದೆ. ಮೂಲತಃ ಧಾರವಾಡ ಜಿಲ್ಲೆಯ ಹಿರೇಗುಂಜಲ್-ಚಿಕ್ಕಗುಂಜಲ್ ನಿವಾಸಿಯಾದ ರಮೇಶ್ ಎಂಬುವವರ ಪುತ್ರಿಯಾಗಿರುವ ಶ್ವೇತಾ, ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಕಳೆದ ಐದು ವರ್ಷಗಳಿಂದ ಈ ಕುಟುಂಬ ಕೊಕ್ಕಡ ಸಮೀಪದ ಹಳ್ಳಿಂಗೇರಿಯಲ್ಲಿ ವಾಸಿಸುತ್ತಿದ್ದು, ತಂದೆ-ತಾಯಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಲಭ್ಯ ಮಾಹಿತಿಯ ಪ್ರಕಾರ, ಶ್ವೇತಾ ಎಂದಿನಂತೆ ಬೆಳಗ್ಗೆ ಎದ್ದು ಕಾಲೇಜಿಗೆ ತೆರಳಲು ಸಿದ್ದತೆ ನಡೆಸುತ್ತಿದ್ದರು. ಘಟನೆ ನಡೆದ ವೇಳೆ ತಂದೆ ಕೆಲಸದ ನಿಮಿತ್ತ ಹೊರಗಡೆ ತೆರಳಿದ್ದರೆ, ತಾಯಿ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಈ ನಡುವೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶ್ವೇತಾ ಪತ್ತೆಯಾಗಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಿಕರು ಮನೆಗೆ ಧಾವಿಸಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಾವಿನ ಕಾರಣ ಕುರಿತು ತನಿಖೆ ಮುಂದುವರಿದಿದೆ.





