ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯ 2026–27ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯು ಜೂನ್ 20, ಶನಿವಾರದಂದು ಅನುಗ್ರಹ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಅತಿಥಿಗಳನ್ನು ಬ್ಯಾಂಡ್ ವಾದನದೊಂದಿಗೆ ಗೌರವಪೂರ್ವಕವಾಗಿ ವೇದಿಕೆಗೆ ಬರಮಾಡಿಕೊಳ್ಳಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಸಂಚಾಲಕರಾದ ವಂದನೀಯ ಫಾ. ಅಬೆಲ್ ಲೋಬೊ ಅವರು ವಹಿಸಿದ್ದರು. ಪ್ರಾಂಶುಪಾಲರಾದ ವಂದನೀಯ ಫಾ. ಡಾ. ವಿಜಯ್ ಲೋಬೊ ಅವರು ಪ್ರಾಸ್ತಾವಿಕ ಭಾಷಣದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ವಿವಿಧ ಶೈಕ್ಷಣಿಕ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಪೋಷಕರ ಜವಾಬ್ದಾರಿಗಳ ಕುರಿತು ವಿವರಿಸಿದರು.

ರಕ್ಷಕ-ಶಿಕ್ಷಕ ಸಂಘದ ಕಾರ್ಯದರ್ಶಿಯವರಾದ ಶ್ರೀಮತಿ ವಿನಯಲತಾ ಅವರು ಸಂಘದ ವಾರ್ಷಿಕ ವರದಿಯನ್ನು ವಾಚಿಸಿದರು.ಇದೇ ಸಂದರ್ಭದಲ್ಲಿ 2025–26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಾರಿ ಅನನ್ಯ ಹಾಗೂ ಶಾಲೆಯ ಅತ್ಯುನ್ನತ ಅಂಕಗಳನ್ನು ಗಳಿಸಿದ ಕುಮಾರಿ ಅನುಶ್ರೀ, ಕುಮಾರಿ ಜೋಸ್ನಾ, ಕುಮಾರಿ ಅಭಿಜ್ಞಾ ಮತ್ತು ಕುಮಾರಿ ಶ್ರೇಯ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಜನರೇಶನ್ ನೆಕ್ಸ್ಟ್ ಸಂಸ್ಥೆಯ ನಿರ್ದೇಶಕರಾದ ಗುರುರಾಜ್ ಹೆಗ್ಡೆ ಅವರು ಅಬಾಕಸ್ ತರಬೇತಿಯಿಂದ ವಿದ್ಯಾರ್ಥಿಗಳಿಗೆ ಗಣಿತ ಕಲಿಕೆಯಲ್ಲಿ ದೊರೆಯುವ ಪ್ರಯೋಜನಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಜೊತೆಗೆ CET, NEET, JEE, CA ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳು ಆರಂಭದಿಂದಲೇ ಸೂಕ್ತ ತಯಾರಿ ನಡೆಸುವ ಅಗತ್ಯತೆಯನ್ನು ವಿವರಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ವಂದನೀಯ ಫಾ. ಅಬೆಲ್ ಲೋಬೊ ಅವರು ಮಕ್ಕಳ ಶಿಕ್ಷಣ, ಶಿಸ್ತು ಹಾಗೂ ಮೌಲ್ಯಗಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರದ ಕುರಿತು ಕಿವಿಮಾತುಗಳನ್ನು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ 2026–27ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ಉಪಾಧ್ಯಕ್ಷರಾಗಿ ಶ್ರೀ ಶಶಿಕಿರಣ್ ಅವರು ಸರ್ವಾನುಮತದಿಂದ ಆಯ್ಕೆಯಾದರು. ಆಯ್ಕೆಯಾದ ಪದಾಧಿಕಾರಿಗಳನ್ನು ಸಂಚಾಲಕರು ಹೂಗುಚ್ಛ ನೀಡಿ ಅಭಿನಂದಿಸಿ ಸ್ವಾಗತಿಸಿದರು.
ವೇದಿಕೆಯಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಪ್ರವೀಣ್ ವಿಜಯ್ ಡಿಸೋಜಾ, ಸದಸ್ಯರಾದ ಶ್ರೀಮತಿ ಬಬಿತಾ ಮೋರಸ್ ಹಾಗೂ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಸ್ಟೀವನ್ ಮೊಂತೆರೊ, ಶ್ರೀಮತಿ ಮರ್ಲಿನ್ ಮೆನೇಜಸ್ ಮತ್ತು ಶ್ರೀ ಜೈಸನ್ ಮೋರಸ್ ಹಾಗೂ ಹಾಲಿ ಶಿಕ್ಷಕರಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ಗುರುರಾಜ ಶಬರಾಯ ಉಪಸ್ಥಿತರಿದ್ದರು.

ಪೋಷಕರು ಅತ್ಯಂತ ಆಸಕ್ತಿ ಹಾಗೂ ಉತ್ಸಾಹದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅದರ ಯಶಸ್ಸಿಗೆ ಸಹಕರಿಸಿದರು.
ಸಹಶಿಕ್ಷಕರಾದ ಶ್ರೀ ಗಣೇಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ರವಿಕುಮಾರ್ ಅವರು ಸ್ವಾಗತಿಸಿ, ಶ್ರೀಮತಿ ರಕ್ಷಾ ಅವರು ವಂದನಾರ್ಪಣೆಗೈದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.






