ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಳಿಯಾರು ಎಂಬಲ್ಲಿ ಭಾನುವಾರ ರಾತ್ರಿ (ಜುಲೈ 22) ನಡುಗಿಸುವ ರಸ್ತೆ ಅಪಘಾತವೊಂದು ಸಂಭವಿಸಿದ್ದು, ತೀವ್ರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ದುರಂತದಲ್ಲಿ ಮೃತಪಟ್ಟ ಯುವಕನನ್ನು ಬಿಳಿಯಾರು ನಿವಾಸಿ ಸುಬ್ರಾಯ ನಾಯ್ಕ್ ಅವರ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.

ಸಂತೋಷ್ ಅವರು ಬೈಕ್ನಲ್ಲಿ ಬಿಳಿಯಾರಿನಿಂದ ಸುಳ್ಯದತ್ತ ತೆರಳುತ್ತಿದ್ದರು. ಇದೇ ವೇಳೆ ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಕಾರಿನೊಂದಿಗೆ ಬೈಕ್ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ತಕ್ಷಣ ಸ್ಥಳೀಯರು ಗಾಯಾಳುವಿನ ನೆರವಿಗೆ ಧಾವಿಸಿದ್ದಾರೆ. ಬಳಿಕ ಅರಂತೋಡಿನ ಸಮೃದ್ಧಿ ಆಂಬುಲೆನ್ಸ್ ಮೂಲಕ ಚಾಲಕ ಶರತ್ ಅವರು ಗಾಯಾಳುವನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.

ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು ಗಾಯದ ತೀವ್ರತೆಯನ್ನು ಗಮನಿಸಿ ಹೆಚ್ಚಿನ ಚಿಕಿತ್ಸೆಗೆ ಕೆವಿಜಿ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದರು.

ನಂತರ ಅವರನ್ನು ಕೆವಿಜಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಯಿತು. ಆದರೆ ತಲೆಗೆ ಉಂಟಾಗಿದ್ದ ಗಂಭೀರ ಗಾಯದಿಂದಾಗಿ ಸಂತೋಷ್ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.






