ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ‘ಆಟಿದ ಪೊರ್ಲು’ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.


ಕಾರ್ಯಕ್ರಮವನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ. ಆರ್. ರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪುಗಳನ್ನು ಧರಿಸಿ ಶಾಲೆಗೆ ಆಗಮಿಸಿದ್ದರು. ಆಟಿ ತಿಂಗಳ ವಿಶೇಷವಾದ ತಿಂಡಿ-ತಿನಿಸುಗಳನ್ನು ಮನೆಯಿಂದ ತಯಾರಿಸಿಕೊಂಡು ಬಂದು, ಅವುಗಳ ಮಹತ್ವ ಹಾಗೂ ವಿಶೇಷತೆಯನ್ನು ಪರಸ್ಪರ ಹಂಚಿಕೊಂಡರು. ಈ ಮೂಲಕ ವಿದ್ಯಾರ್ಥಿಗಳಿಗೆ ಆಟಿ ತಿಂಗಳ ಸಂಪ್ರದಾಯ, ಆಹಾರ ಪದ್ಧತಿ ಹಾಗೂ ಅದರ ಮಹತ್ವದ ಕುರಿತು ಅರಿವು ಮೂಡಿಸಲಾಯಿತು.


ನೃತ್ಯ, ಅಭಿನಯ, ಗಾದೆ ಮಾತುಗಳು ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಆಟಿ ತಿಂಗಳ ವಿಶೇಷತೆಗಳನ್ನು ಮಕ್ಕಳಿಗೆ ಪರಿಚಯಿಸಲಾಯಿತು. ಹಿಂದಿನ ಕಾಲದಲ್ಲಿ ಆಟಿ ತಿಂಗಳಲ್ಲಿ ಜನರು ಯಾವ ರೀತಿಯ ಜೀವನ ನಡೆಸುತ್ತಿದ್ದರು, ಅವರ ಆಹಾರ ಪದ್ಧತಿ ಹಾಗೂ ಜೀವನಶೈಲಿ ಹೇಗಿತ್ತು ಎಂಬುದರ ಬಗ್ಗೆಯೂ ಮಕ್ಕಳಿಗೆ ಮಾಹಿತಿಯನ್ನು ನೀಡಲಾಯಿತು.

ಶಾಲೆಯ ಶಿಕ್ಷಕ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಅಗತ್ಯ ಸಹಕಾರ ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.





