ಬಂಟ್ವಾಳ: ಬಂಟ್ವಾಳದ ಸಜಿಪ ಮೂಡ ಗ್ರಾಮದಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 25 ವರ್ಷದ ಯುವಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾರೆ.

ನಂದಾವರ-ಸುನ್ನೀ ನಗರ ನಿವಾಸಿ ಮುಹಮ್ಮದ್ ರಶೀಕ್ ಮೃತಪಟ್ಟ ದುರದೃಷ್ಟಕರ ಯುವಕ. ನಂದಾವರ ಶಾಲೆಯ ಸಮೀಪ ಗ್ಯಾರೇಜ್ ನಡೆಸುತ್ತಿದ್ದ ರಶೀಕ್, ಸಜಿಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬೈಕ್ನಲ್ಲಿ ತೆರಳುತ್ತಿದ್ದರು.

ಈ ವೇಳೆ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ಶಿವಾಜಿ ಕುಮಾರ್ ಎಂಬುವರು ಚಲಾಯಿಸುತ್ತಿದ್ದ ಆಟೋ ರಿಕ್ಷಾ ಹಾಗೂ ರಶೀಕ್ ಅವರ ಬೈಕ್ ನಡುವೆ ಭೀಕರ ಡಿಕ್ಕಿಯಾಗಿದೆ. ಅಪಘಾತದಿಂದ ತಲೆಗೆ ಗಂಭೀರ ಗಾಯಗೊಂಡಿದ್ದ ರಶೀಕ್ ಅವರನ್ನು ಸ್ಥಳೀಯರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.


ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಝನುಲ್ ಆಬಿದೀನ್ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.







