ತುಮಕೂರು (ಅ.19) : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಯೋಜಿಸಿದ್ದ ರಾಜ್ಯಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟವು ತುಮಕೂರಿನ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಭವ್ಯವಾಗಿ ನೆರವೇರಿತು.

ಈ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಶ್ರೇಷ್ಠ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿಕೊಂಡಿದೆ.

ಅಂತಿಮ (ಫೈನಲ್) ಪಂದ್ಯದಲ್ಲಿ ವಿಜಯಪುರ ಜಿಲ್ಲೆಯ ತಂಡದ ವಿರುದ್ಧ 38–26 ಅಂಕಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿ, 2025–26ನೇ ಸಾಲಿನ ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕಬಡ್ಡಿ ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದೆ.

ಕಬಡ್ಡಿ ತಂಡದ ತರಬೇತುದಾರರಾಗಿ ಕೃಷ್ಣಾನಂದ ರಾವ್ ಮತ್ತು ವ್ಯವಸ್ಥಾಪಕರಾಗಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸಂದೇಶ ಪೂಂಜ ಕಾರ್ಯನಿರ್ವಹಿಸಿದ್ದಾರೆ.

ಈ ಗೆಲುವಿನೊಂದಿಗೆ ನಮ್ಮ ಕಾಲೇಜಿನ ತಂಡವು ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಗೌರವವನ್ನು ಪಡೆದುಕೊಂಡಿದೆ.
ವಿಜೇತ ತಂಡಕ್ಕೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳು, ಕಾಲೇಜಿನ ಪ್ರಾಂಶುಪಾಲರು, ಕ್ರೀಡಾ ಸಂಘದ ಕಾರ್ಯದರ್ಶಿಗಳು ಹಾಗೂ ಬೋಧಕ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿ ಶುಭಹಾರೈಸಿದ್ದಾರೆ.
