ಉಡುಪಿ: ನವೆಂಬರ್ 28 ರಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಲಿದ್ದಾರೆ. ಉಡುಪಿ ಮಠಕ್ಕೆ ಆಗಮಿಸಿ ಶ್ರೀಕೃಷ್ಣ ನ ದರ್ಶನ ಪಡೆಯಲಿದ್ದಾರೆ.

ಇದನ್ನೂ ಓದಿ: 🔴ಉಜಿರೆ: ಉಜಿರೆಯ ಶ್ರೀ ಧ.ಮಂ. ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ಬೂಟ್ ಕ್ಯಾಂಪ್ ಕಾರ್ಯಕ್ರಮ
ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಪೊಡವಿಯೊಡೆಯನ ದರ್ಶನ ಮಾಡಲಿದ್ದಾರೆ. ಪ್ರಸಾದ ಸ್ವೀಕರಿಸಿದ ಬಳಿಕ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ ಪಾರಾಯಣ- ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಮಂತ್ರಿ ಕಚೇರಿಯು ಪ್ರಧಾನಿ ಮೋದಿಯವರ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಗ್ಗೆ ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ, ಮಠದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತವು ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಪ್ರಾರಂಭಿಸಿದೆ. ಭದ್ರತಾ ವ್ಯವಸ್ಥೆಗಳು ಮತ್ತು ಇತರ ಅಗತ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ.

ಸಿಎಂ ಆಗಿದ್ದಾಗ ಮೊದಲ ಭೇಟಿ
ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ನರೇಂದ್ರ ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದರು. 2008ರಲ್ಲಿ ಸಿಎಂ ಮೋದಿ ಶ್ರೀಕೃಷ್ಣನ ದರ್ಶನ ಪಡೆದಿದ್ದರು. ಇದೀಗ ಪ್ರಧಾನಿಯಾಗಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಮೊದಲನೇ ಭೇಟಿಯಾಗಿದ್ದರೆ, ಒಟ್ಟಾರೆ 2ನೇ ಭೇಟಿಯಾಗಿದೆ. ವಿಶೇಷ ಅಂದರೆ ಅಂದೂ ಕೂಡ ಇದೇ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮೋದಿ ಸ್ವಾಗತಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಿದ್ದರು.



